SSLC exams-2026 ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಸಿಗಲಿದೆ 50,000 ರೂ. ನಗದು ಬಹುಮಾನ

ಕರ್ನಾಟಕ ಸರ್ಕಾರವು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಬದಲಿಗೆ 50,000 ರೂಪಾಯಿ ನಗದು ಬಹುಮಾನ ನೀಡಲು ತೀರ್ಮಾನಿಸಿದೆ. ಜಿಲ್ಲಾ ಮಟ್ಟದಲ್ಲಿ ಮೊದಲ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಈ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಿ, ವಿದ್ಯಾರ್ಥಿಗಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡಲು ಈ ಬದಲಾವಣೆ ಮಾಡಲಾಗಿದೆ.

SSLC exams-2026 ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಸಿಗಲಿದೆ 50,000 ರೂ. ನಗದು ಬಹುಮಾನ

SSLC exams-2026 ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ಸಿಗಲಿದೆ 50,000 ರೂ. ನಗದು ಬಹುಮಾನ

ರಾಜ್ಯದ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹ ನೀಡಲು ಲ್ಯಾಪ್‌ಟಾಪ್‌ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದ್ದ ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹದಾಯಕ ಕ್ರಮಗಳಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ಪ್ರತಿ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‌ಟಾಪ್ ಬದಲಿಗೆ ಈಗ ನೇರವಾಗಿ 50,000 ರೂ. ನಗದು ಬಹುಮಾನ ನೀಡಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯೋಜನೆಯಲ್ಲಿ ಆಗಿರುವ ಬದಲಾವಣೆಗಳು ಏನು? ಈ ಯೋಜನೆಗೆ ಯಾರೆಲ್ಲಾ ಅರ್ಹರು? ಇತ್ಯಾದಿ ಮಾಹಿತಿಗಳು ಇಲ್ಲಿವೆ.

ಲ್ಯಾಪ್‌ಟಾಪ್‌ ಬದಲು ನಗದು ಬಹುಮಾನ ಯೋಜನೆ ಜಾರಿ ಏಕೆ?

ಕರ್ನಾಟಕ ಸರ್ಕಾರವು ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಲು ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲಾ ಹಾಗೂ ಬ್ಲಾಕ್ ಮಟ್ಟದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಮೂವರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸುವ ಮಹತ್ತರ ಯೋಜನೆಯನ್ನು ಜಾರಿಗೆ ತಂದಿತ್ತು. ಕರ್ನಾಟಕ ಸರ್ಕಾರವು ಸರ್ಕಾರಿ ಶಾಲಾ ಎಸ್‌ಎಸ್‌ಎಲ್‌ಸಿ ಟಾಪರ್‌ಗಳಿಗೆ ನೀಡುತ್ತಿದ್ದ ಪ್ರೋತ್ಸಾಹಕ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡಿದ್ದು, ಈ ಹಿಂದೆ ನೀಡಲಾಗುತ್ತಿದ್ದ ಲ್ಯಾಪ್‌ಟಾಪ್‌ಗಳ ಬದಲಿಗೆ ಈಗ 50,000 ರೂ. ನಗದು ಬಹುಮಾನವನ್ನು ನೀಡಲು ನಿರ್ಧರಿಸಿದೆ. ಈ ಹೊಸ ನಿಯಮದಂತೆ, ಪ್ರತಿ ಶೈಕ್ಷಣಿಕ ಜಿಲ್ಲೆಯ ಮೊದಲ ಮೂರು ಸ್ಥಾನ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಹಣವನ್ನು ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಲ್ಯಾಪ್‌ಟಾಪ್‌ಗಳ ಖರೀದಿ ಮತ್ತು ವಿತರಣೆಯಲ್ಲಿನ ವಿಳಂಬ ಹಾಗೂ ತಾಂತ್ರಿಕ ಸವಾಲುಗಳನ್ನು ನಿವಾರಿಸಲು ಈ ಕ್ರಮ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಈ ಹಣವನ್ನು ತಮ್ಮ ಇಚ್ಛೆಯಂತೆ ಮುಂದಿನ ಶಿಕ್ಷಣದ ಶುಲ್ಕ, ಪುಸ್ತಕಗಳು ಅಥವಾ ಅವರಿಗೆ ಬೇಕಾದ ಕಂಪನಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಖರೀದಿಸಲು ಬಳಸುವ ಮೂಲಕ ಹೆಚ್ಚಿನ ಶೈಕ್ಷಣಿಕ ಸ್ವಾತಂತ್ರ್ಯವನ್ನು ಪಡೆಯಲಿದ್ದಾರೆ. ಈ ಸಬಂಧ ಜ.22 ರಂದು ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

 

ಬದಲಾವಣೆಗೆ ಕಾರಣಗಳೇನು?

  • ಅರ್ಹತೆ ಪಡೆದ ಪ್ರತಿಯೊಬ್ಬ ವಿದ್ಯಾರ್ಥಿಗೂ ತಲಾ 50,000 ರೂ. ನಗದು ಬಹುಮಾನವನ್ನು ನೀಡಲಾಗುತ್ತದೆ.
  • ಜಿಲ್ಲಾ ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಮೊದಲ ಮೂರು ಸ್ಥಾನಗಳನ್ನು ಪಡೆದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ.
  • ಈ ಯೋಜನೆಯಲ್ಲಿ ಪಾರದರ್ಶಕತೆ ಕಾಪಾಡಲು, ಬಹುಮಾನದ ಮೊತ್ತವನ್ನು ವಿದ್ಯಾರ್ಥಿಗಳ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡಲಾಗುತ್ತದೆ.
  • ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಾದ್ಯಂತ ಒಟ್ಟು 758 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಈ ಪ್ರಯೋಜನಕ್ಕಾಗಿ ಗುರುತಿಸಲಾಗಿದೆ.
  • ಲ್ಯಾಪ್‌ಟಾಪ್ ಬದಲಿಗೆ ನಗದು ನೀಡುವ ಈ ನಿರ್ಧಾರವು ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣದ ಅಗತ್ಯಗಳಿಗೆ ತಕ್ಕಂತೆ ಹಣವನ್ನು ಬಳಸಿಕೊಳ್ಳಲು ಹೆಚ್ಚಿನ ಸ್ವಾತಂತ್ರ್ಯವನ್ನು ನೀಡುತ್ತದೆ.

ಅರ್ಹತಾ ಮಾನದಂಡಗಳೇನು?

  • ಈ ಯೋಜನೆಯು ಕೇವಲ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಖಾಸಗಿ ಅಥವಾ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುವುದಿಲ್ಲ.
  • ಅಭ್ಯರ್ಥಿಯು ಜಿಲ್ಲಾ ಮಟ್ಟದಲ್ಲಿ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಮೊದಲ ಮೂರು ಸ್ಥಾನಗಳಲ್ಲಿ ಒಬ್ಬರಾಗಿರಬೇಕು.
  • ವಿದ್ಯಾರ್ಥಿಯ ಸಂಪೂರ್ಣ ಶೈಕ್ಷಣಿಕ ಮಾಹಿತಿಯು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಕಡ್ಡಾಯವಾಗಿ ದಾಖಲಾಗಿರಬೇಕು.
  • ಅರ್ಹ ವಿದ್ಯಾರ್ಥಿಯ ಹೆಸರಿನಲ್ಲಿಯೇ ಬ್ಯಾಂಕ್ ಖಾತೆ ಇರಬೇಕು ಮತ್ತು ಆ ಖಾತೆಯು ಕಡ್ಡಾಯವಾಗಿ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಆಗಿರಬೇಕು

ನಗದು ಬಹುಮಾನ ನೀಡಿಕೆ ಹೇಗೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅರ್ಹ ಫಲಾನುಭವಿಗಳನ್ನು ಶಿಕ್ಷಣ ಇಲಾಖೆಯ ಕಛೇರಿಯಿಂದಲೇ ನೇರವಾಗಿ ಗುರುತಿಸಲಾಗುತ್ತದೆ. ಹೀಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಸೌಲಭ್ಯವನ್ನು ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಇದರೊಂದಿಗೆ, ಪ್ರತಿಭಾವಂತ ವಿದ್ಯಾರ್ಥಿಗಳು ಈ ಸೌಲಭ್ಯಕ್ಕಾಗಿ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿಯೂ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಸರ್ಕಾರವು ಈ ಯೋಜನೆಗಾಗಿ ಪ್ರತ್ಯೇಕ ಆನ್‌ಲೈನ್ ಅರ್ಜಿ ನಮೂನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ dce.karnataka.gov.in ನಲ್ಲಿ ಲಭ್ಯವಾಗುವಂತೆ ಮಾಡಿದೆ. ಉನ್ನತ ಶಿಕ್ಷಣದ ಉದ್ದೇಶಕ್ಕಾಗಿ ಈ ಸೌಲಭ್ಯವನ್ನು ಬಯಸುವ ಯಾವುದೇ ಅರ್ಹ ವಿದ್ಯಾರ್ಥಿಯು ಈ ಜಾಲತಾಣದ ಮೂಲಕ ಸುಲಭವಾಗಿ ನೋಂದಾಯಿಸಿಕೊಳ್ಳಬಹುದು.